ಸೋಮವಾರ, ಆಗಸ್ಟ್ 27, 2012

ಸೌಂದರ್ಯಕ್ಕೆ ಹೆಸರಾಗಿರುವ ಕೊಡಗಿನ ‘ಅಬ್ಬಿ ಪಾಲ್ಸ್’

ಕನ್ನಡ ನಾಡಿನ ಸ್ವರ್ಗ ಎಂದೇ ಕರೆಯಲ್ಪಡುವ ಕೊಡಗು ಜಿಲ್ಲೆಯಲ್ಲಿ ಮಳೆ ಆರಂಭವಾಗುತ್ತಿದ್ದಂತೆಯೇ ನೀರು ಬತ್ತಿ ಬರಿದಾಗಿದ್ದ ಬಂಡೆಗಳು ಮರುಜೀವ ಪಡೆಯುತ್ತವೆ. ಕೊಡಗಿನಲ್ಲಿ ಹಲವಾರು ಪ್ರಕೃತಿ ರಮಣೀಯವಾದ ಜಲಪಾತಗಳಿವೆ. ಇವುಗಳ ಪೈಕಿ ‘ಅಬ್ಬಿ ಪಾಲ್ಸ್’ (ಜಲಪಾತ) ಒಂದಾಗಿದ್ದು, ಇದು ಮುಖ್ಯಪಟ್ಟಣ ಮಡಿಕೇರಿಗೆ ಸಮೀಪವಿರುವುದರಿಂದ ಪ್ರಮುಖ ಪ್ರವಾಸಿ ತಾಣವಾಗಿ ಸಾವಿರಾರು ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ.

ಸಾಮಾನ್ಯವಾಗಿ ಕೊಡಗಿನಲ್ಲಿ ಮಳೆ ಬೀಳುತ್ತಿದ್ದಂತೆಯೇ ಬೇಸಿಗೆಯ ಬಿಸಿಲಿಗೆ ಸೊರಗಿ ಹೆಬ್ಬಂಡೆಯ ಮಧ್ಯೆ ಮಯವಾದ ಎಲ್ಲಾ ಜಲಪಾತಗಳು ಮರುಜನ್ಮ ಪಡೆಯುತ್ತವೆ. ಮಡಿಕೇರಿಯಿಂದ ಮುಂದಕ್ಕೆ ಸುಮಾರು 8 ಕಿ.ಮೀ.ದೂರ ಚಲಿಸಿದರೆ ಈ ‘ಅಬ್ಬಿ ಜಲಪಾತ’ ಕಾಣ ಸಿಗುತ್ತದೆ. ಈ ಜಲಪಾತವನ್ನು ವೀಕ್ಷಣೆ ಮಾಡಲು ತೆರಳುವವರಿಗೆ ಮಡಿಕೇರಿಯಿಂದ ಯಾವುದೇ ಬಸ್ ಸೌಕರ್ಯವಿಲ್ಲ. ಹಾಗಾಗಿ ಮಡಿಕೇರಿಯಿಂದ ಬಾಡಿಗೆಗೆ ಖಾಸಗಿ ವಾಹನಗಳನ್ನು ಮಾಡಿಕೊಂಡು ಹೋಗಬೇಕಾಗುತ್ತದೆ.
ಇನ್ನು ನಡೆದುಕೊಂಡು ಹೋಗುದಾದರೆ 200 ಮೀ. ನಷ್ಟು ಅಂಕುಡೊಂಕಾದ ರಸ್ತೆಯಲ್ಲಿ ಅರಣ್ಯ, ಕಾಫಿ, ಏಲಕ್ಕಿ ತೋಟದ ನಡುವೆ ಹೆಜ್ಜೆ ಹಾಕುತ್ತಾ ಮುನ್ನಡೆಯುತ್ತಿದ್ದರೆ ದಾರಿ ಸಾಗುವುದೇ ಗೊತ್ತಾಗುವುದಿಲ್ಲ. ಇನ್ನೇನು ಕೆಲವೇ ಕಿ.ಮೀ.ಅಂತರಗಳಲ್ಲಿ ಜಲಪಾತ ಇದೆ ಎನ್ನುವುದು ಭೋರ್ಗರೆಯುವ ಸದ್ದಿಗೆ ಗೊತ್ತಾಗಿ ಬಿಡುತ್ತದೆ. ಗುಡ್ಡದಲ್ಲಿ ತೋಟದ ನಡುವೆ ರಭಸದಿಂದ ಭೋರ್ಗರೆಯುತ್ತಾ ಹರಿಯುವ ನದಿ ನಮಗೆ ರಸ್ತೆಯಿಂದಲೇ ಕಾಣಸಿಗುತ್ತದೆ.
ಅಲ್ಲಿಂದ ಮುಂದೆ ಇಳಿಜಾರು ರಸ್ತೆಯಲ್ಲಿ ಸಾಗಿದರೆ ನಮಗೆ ಸಮತಟ್ಟಾದ ವಾಹನ ನಿಲುಗಡೆಯ ಸ್ಥಳ ಕಾಣಸಿಗುತ್ತದೆ. ಅಲ್ಲಿಂದ ಎಡಕ್ಕೆ ಕಾಫಿ ತೋಟದ ಮಧ್ಯೆ ನಡೆಯುತ್ತಾ ಹೋದರೆ ಜಲಪಾತದ ಭೋರ್ಗರೆತ ಕಿವಿಗೆ ಬಡಿಯುತ್ತದೆ. ಆ ನಂತರ ಕೆಳಕ್ಕೆ ಮೆಟ್ಟಿಲುಗಳನ್ನು ಇಳಿಯುತ್ತಾ ಹೋದರೆ ಅಬ್ಬಿ ಜಲಪಾತದ ಸನಿಹಕ್ಕೆ ಹೋಗಬಹುದು.
ವಿಶಾಲ ಹೆಬಂಡೆಗಳ ನಡುವೆ ಸುಮಾರು ನೂರಾ ಐದು ಅಡಿಯಷ್ಟು ಎತ್ತರದಿಂದ ಮೈದುಂಬಿಕೊಂಡು ಧುಮುಕುವ ಜಲಪಾತದ ವೈಭವವನ್ನು ನೋಡಬಹುದು. ಅದರಲ್ಲಿಯೂ ಮಳೆಗಾಲದಲ್ಲಿ ಇದರ ರೌದ್ರಾವತಾರವನ್ನು ಹತ್ತಿರದಿಂದ ನೋಡುವುದೇ ಕಣ್ಣಿಗೊಂದು ಹಬ್ಬ. ಜಲಪಾತದ ಸೊಬಗನ್ನು ಪ್ರವಾಸಿಗರಿಗೆ ಹತ್ತಿರದಿಂದ ಸವಿಯಲೆಂದೇ ಇತ್ತೀಚೆಗೆ ಅಡ್ಡಲಾಗಿ ತೂಗು ಸೇತುವೆಯನ್ನು ನಿರ್ಮಿಸಲಾಗಿದೆ. ಇದರಲ್ಲಿ ನಿಂತು ಜಲಪಾತದ ಸೌಂದರ್ಯವನ್ನು ಮನದಣಿಯೆ ಸವಿಯಬಹುದು.
ಅಪಾಯಕಾರಿ ಜಲಪಾತ: ಅಬ್ಬಿ ಜಲಪಾತ ನೋಡಲು ಎಷ್ಟೊಂದು ಸುಂದರವಾಗಿದೆಯೋ ಅಷ್ಟೇ ಅಪಾಯಕಾರಿ. ಬೇಸಿಗೆಯ ದಿನಗಳಲ್ಲಿ ಜಲಪಾತದಲ್ಲಿ ನೀರಿನ ಭೋರ್ಗರೆತ ಕಡಿಮೆಯಾದಾಗ ಹೆಚ್ಚಿನ ಪ್ರವಾಸಿಗರು ಜಲಧಾರೆಯಾಗಿ ಧುಮುಕಿ ಬಳಿಕ ನದಿಯಾಗಿ ಹರಿದು ಹೋಗುವ ನೀರಿನಲ್ಲಿ ಸ್ನಾನ ಮಾಡುತ್ತಾರೆ. ಆದರೆ ಕೆಲವರು ಜಲಪಾತದ ಬಳಿ ಹಾಕಲಾಗಿರುವ ಎಚ್ಚರಿಕೆಯ ನಾಮಫಲಕವನ್ನೂ ಗಮನಿಸದೆ ನೇರವಾಗಿ ಜಲಪಾತದ ತಳಭಾಗಕ್ಕೆ ತೆರಳಿ ಧುಮುಕುವ ಜಲಧಾರೆಗೆ ತಲೆಕೊಟ್ಟು ಸ್ನಾನಮಾಡುವ ಸಾಹಸ ಮಾಡುತ್ತಾರೆ. 
ಇದು ಎಷ್ಟೊಂದು ಅಪಾಯಕಾರಿ ಎಂಬುವುದಕ್ಕೆ ಇದುವರೆಗೆ ಇಲ್ಲಿನ ಸುಳಿಗೆ ಸಿಲುಕಿ ಸಾವನ್ನಪ್ಪಿರುವ ಸುಮಾರು ಮಂದಿ ಸಾಕ್ಷಿಯಾಗುತ್ತಾರೆ. ಇನ್ನು ಕೊಡಗಿಗೆ ಬರುವ ದೂರದ ಪ್ರವಾಸಿಗರಿಗೆ ಇಲ್ಲಿ ಹರಿಯವ ನೀರೆಲ್ಲಾ ಕಾವೇರಿ ನೀರು ಎಂಬ ನಂಬಿಕೆ. ಹಾಗಾಗಿ ಅಬ್ಬಿಜಲಪಾತಕ್ಕೆ ಭೇಟಿ ನೀಡುವ ಪ್ರವಾಸಿಗರು ಕೂಡ ಜಲಪಾತದಲ್ಲಿ ಸ್ನಾನ ಮಾಡುವುದು ಪವಿತ್ರ ಎಂದುಕೊಳ್ಳುತ್ತಾರೆ. 
ಅಷ್ಟೇ ಅಲ್ಲ ಈ ನೀರನ್ನು ಕೆಲವರು ಪವಿತ್ರ ತೀರ್ಥ ಎಂದು ತಮ್ಮೊಂದಿಗೆ ಕೊಂಡೊಯ್ಯವ ಪ್ರಯತ್ನವನ್ನು ಮಾಡುತ್ತಾರೆ. ಈ ಕೊಳಚೆ ನೀರಿಗೆ ಹಲವು ನದಿ ತೊರೆಗಳು ಸೇರುವುದರಿಂದ ಜಲಪಾತವನ್ನು ತಲುಪುವ ವೇಳೆಗೆ ನೀರು ಶುದ್ಧವಾಗಬಹುದು ಆದರೂ ಎಚ್ಚರವಾಗಿರುವುದು ಒಳಿತು.